|| ಶ್ರೀ ರಾಮ ಜಯ ರಾಮ ಜಯ ಜಯ ರಾಮ ||

Tuesday, July 13, 2010

ತೋಚಿದ್ದು-ಗೀಚಿದ್ದು

ನಾನೆಂಬುದು ನಾನಲ್ಲ,
ನನದೆಂಬುದು ನನದಲ್ಲ,
ನನ್ನವರೆಂಬುವರು ನನ್ನವರಲ್ಲ,
ಆದರೂ ಈ ಸತ್ಯ ನಾ ತಿಳಿದಿಲ್ಲ!
*** *** ***


ಬದುಕುವಾಸೆ ವರ್ಷ ನೂರು,
ಅಂದು ಕೊಂಡದ್ದು ನೂರು,
ಕನಸು ಕಂಡಿದ್ದು ನೂರು,
ಆದರೂ ಆಗಲಿಲ್ಲ ಚೂರು-ಪಾರು!
*** *** ***

ಬರುವಾಗ ಒಂಟಿ,
ಹೋಗುವಾಗ ಒಂಟಿ,
ನಡುವಿನಲೇಕೆ ಈ ಜಂಟಿ?
*** *** ***

ನನದೆಲ್ಲವೂ ಸರಿ
ನಾ ನುಡಿವುದೆಲ್ಲವೂ ಸರಿ
ನಾ ಮಾಡುವುದೆಲ್ಲವೂ ಸರಿ
ಹೌದಲ್ಲವೇ? ನೀವೇನಂತೀರಿ?
ಖಂಡಿತಾ ಅಲ್ಲ! ಸಧ್ಯಕ್ಕೆ ನೀ ಪಕ್ಕಕ್ಕೆ ಸರಿ!!
*** *** ***

ನನ್ನ ನಿತ್ಯಾನುಷ್ಠಾನದ ಮೂಲ ಜಪಮಂತ್ರ 'ಬೇಕು'
ಎಲ್ಲವೂ ಬೇಕು, ಎಲ್ಲವೂ ನನಗೇ ಬೇಕು,
ಆದರೂ ತಿಳಿಯದಾಗಿದೆ, 'ನನಗೇನು ಬೇಕು'
ಯಾರಾದರೂ ತಿಳಿಸುವಿರಾ ಈ ಬೇಕಿಗೊಂದು ಬ್ರೇಕು?
*** *** ***

ಬದುಕಬೇಡ ನೀ ನೂರು ವರುಷ
ಖಂಡಿತಾ ತರಲಾರದು ಅದು ನಿನಗೆ ಹರುಷ
ಬದುಕಾಗುವುದು ನಿತ್ಯ ಗೋಳಾಟದ ಬೇಗುದಿ
ತೊಲಗಿದರೆ ಸಾಕಪ್ಪಾ ಎಂದು ಕಾಯ್ವರೇ ಬಲು ಮಂದಿ!
*** *** ***

ದಿನಾ ನಡೆಯುತ್ತೇನೆ, ದಿನಾ ಎಡವುತ್ತೇನೆ
ದಿನಾ ನುಡಿಯುತ್ತೇನೆ, ದಿನಾ ತೊದಲುತ್ತೇನೆ
ದಿನಾ ಅಳುತ್ತೇನೆ, ದಿನಾ ನಗುತ್ತೇನೆ
ದಿನದಿನದ ಬಾಳಿನ ಅನುಭವವೆ ಇದೇ ತಾನೆ?
*** *** ***

ಒಳಗೆ ಜ್ವಾಲಾಮುಖಿ, ಹೊರಗೆ ಹಸನ್ಮುಖಿ,
ಒಳಗೆ ನಾನಾ ಜಂಜಾಟದ ನಡುವೆಯೂ ಜೀವನ್ಮುಖಿ,
ಬದುಕುವುದು ನನಗಲ್ಲ, ಪರರಿಗೆ,
ಅದುವೇ ಸದಾ ಇರಲಿ ನನ ಪಾಲಿಗೆ!
*** *** ***

ಕಡೆಗಣಿಸಬೇಡ ನಿನ್ನೀ ದೇಹವನು
ಅದೇ ಆ ಭಗವಂತನ ಅನುಪಮ ಸೃಷ್ಠಿ
ಸದಾ ಇರಲಿ ಸ್ವಸ್ಥ ದೇಹ, ಸ್ವಸ್ಥ ಮನಸ್ಸು
ಅದುವೇ ಇಹಲೋಕದಿಂದ ಪರಲೋಕಕ್ಕೊಯ್ಯುವ ಸಾಧನ ಸಂಪತ್ತು!
*** *** ***

ಸುರಿಯುತಿಹುದು ಮಳೆ

ತಂಪಾಗಿಹುದು ಇಳೆ

ಬಸಿರೊಡೆಯಿತು ಧರೆ,

ಹೊದ್ದಿತು ಹಸಿರಿನಾ ಝರಿ-ಸೀರೆ!
*** *** ***

ನಿನಗಿರಲು ಅಧಿಕಾರ
ಇರುವುದು ವಂದಿ ಮಾದಿಗರ ಜೈಜೈಕಾರ
ಅಧಿಕಾರ ಹೋದೊಡನೆ ವಂದಿ ಮಾದಿಗರು ಮಾಯ
ಕಾಲ್ಗೆ ಬೀಳುವವರಿಲ್ಲ, ಕಾಲೆಳೆಯುವವರೇ ಎಲ್ಲ!
*** *** ***

ಒಳಗೆ ತುಂಬಿದಾ ನಗು, ಹೊರಬಾರದ ನಗು,
ಒಳಗೆ ತುಂಬಿದಾ ಹರುಷ, ಹೊರಗೆ ಬರೀ ವರ್ಷ
ಒಳಗೆ ತುಂಬಿದಾ ಭಾವನೆಗಳು, ಹೊರಗೆ ಬರೀ ಗೋಜಲುಗಳು
ಉಕ್ಕಬಾರದೇ ಈ ಅಗ್ನಿಪರ್ವತ, ಉಗುಳಬಾರದೇ ತನ್ನೊಡಲಿನ ತುಡಿತಗಳ?
*** *** ***

ಒಳಗೊಂದು ಮುಖ, ಹೊರಗೆ ನಾನಾ ಮುಖ
ಒಳಗೆ ಒಂದೇ ಭಾವನೆ, ಹೊರಗೆ ಹರಿವುದು ನಾನಾ ಭಾವನೆ
ಒಳಗೆಲ್ಲ ತಳಮಳ-ಕಳವಳ, ಹೊರಗೆ ಮಾತ್ರ ಫಳಫಳ
ಒಳಗೆಲ್ಲ ಬರೀ ಬೇಗುದಿ, ಹೊರಗೆ ತೋರಿಕೆಯ ನೆಮ್ಮದಿ
ಒಳಗಿದೆ ಎಡವಿದ ನೋವು, ಹೊರಗೆ ಮಾತ್ರ ಸತ್ಯದ ಸಾವು
ನನಗಿರಲಿ ಎಲ್ಲವೂ, ಉಳಿದವರಿಗೇಕೆ ಅನ್ಯಥಾ ಎಲ್ಲವೂ?

*** *** ***
ನನಗ್ಯಾರಿಲ್ಲ ನಾನೊಬ್ಬನೇ ಎಲ್ಲ
ಎಲ್ಲವೂ ಇದೆ ಆದರೆ ನನಗೇನಿಲ್ಲ
ಹೊಳೆ ದಾಟಿದ ಮೇಲೆ ಅಂಬಿಗ ಮಿಂಡ
ಅಂಬಿಗನ ಬಾಳಿನ ಪರಿ ನನ ಬಾಳೂ ದಂಡ!
*** *** ***
ನೊಂದು ಮೂಕಾಗಿ

ಬೆಂದು ಬೆಂಡಾಗಿ

ಸೋತು ಸುಣ್ಣಾಗಿ, ಸುಟ್ಟು ಕರಕಲಾಗಿ

ರೋಧಿಸುತಿಹುದೀ ಜೀವ

*** *** ***

ಬಳಸಿದರು ನನ್ನನ್ನು ಕಬ್ಬಿನ ಜೆಲ್ಲೆಯಂತೆ

ಬಳಸಿ ಮೂಲೆ ಸೇರಿಸಿದರು ಕಸಪೊರಕೆಯಂತೆ

ಮೊಸರನ್ನ ತಿಂದು ನನ ಮೂತಿಗೆ ಸವರಿದರು ಕೋತಿಯಂತೆ

ಎಸೆದರು ಉಂಡಾದ ಮೇಲೆ ಬಾಳೆಎಲೆಯ ಪರಿಯಂತೆ!

*** *** ***

ಮಾತಾಡಿ ಕೆಟ್ಟರು ಕೆಲವರು

ಮಾಡಿ ಕೆಟ್ಟರು ಕೆಲವರು

ಮಾತಾಡಿ-ಮಾಡಿ ಕೆಟ್ಟವರೂ ಕೆಲವರು

ಮಾತಾಡದೇ, ಮಾಡದೇ ಜಾಣರಾದರು ಹಲವರು!

*** *** ***


ದುರ್ಬಳಿಸಿಹರು ಎನ್ನ ಸಹನೆಯನ್ನ

ದುರ್ಬಳಿಸಿಹರು ಎನ್ನ ಮೌನವನ್ನ

ದುರ್ಬಳಿಸಿಹರು ಎನ್ನ ಮೃದು ಮನಸ್ಸನ್ನ

ನಾನೀಗ ಬರೀ ಹಳಸಿದ ಚಿತ್ರಾನ್ನ!



*** *** ***


ಋಣದಿಂದ ಬಂತು ಸಂಬಂಧ

ಸಂಬಂಧದಿಂದ ಹೆಚ್ಚಿತು ಋಣಬಂಧ

ಅದುವೇ ಜೀವ-ಜೀವನದ ಋಣಾನುಬಂಧ

ಅದುವೇ ತಪ್ಪಿಸಿಕೊಳ್ಳಲಾರದ ಪಾಶ-ಬಂಧ!


*** *** ***


Saturday, July 3, 2010

ನಮಗೇನಾಗಿದೆ.


ಮಾವಿನ ಮರ - ಕೋಗಿಲೆ ; ಎರಡೂ ಬೇರೆ ಬೇರೆ ಒಂದಕ್ಕೊಂದು ಸಂಬಂಧವಿಲ್ಲದ ಅಸ್ತಿತ್ವಗಳು. ಆದರೆ ಅವೆರಡಕ್ಕೂ ಅಗಲಲಾಗದ ನಂಟು. ಮಾವಿನ ಮರ ಚಿಗುರೊಡೆದೊಡನೆಯೇ ಕೋಗಿಲೆ ತನ್ನ ಗಾನಸುಧೆಯೊಂದಿಗೆ ಹಾಜರ್. ಅದೇ ನಮ್ಮನ್ನು ನೋಡಿ. ಹುಟ್ಟಿದ ಕೂಡಲೇ ಅಪ್ಪ-ಅಮ್ಮನ ಸಂಬಂಧ; ಸ್ವಲ್ಪ ಸಮಯದ ನಂತರ ಅಣ್ಣ-ತಂಗಿಯರ ಸಂಬಂಧ; ಬಂಧುಗಳ ಸಂಬಂಧ - ಹೀಗೆ ಈ ಸಂಬಂಧಗಳ ಸರಪಳಿ ಕೊನೆಯವರೆಗೂ ಬೆಳೆಯುತ್ತಲೇ ಹೋಗುತ್ತದೆ. ಆದರೆ ಇಂದು ನಾನಾ ಕಾರಣಗಳಿಂದ ಈ ರಕ್ತ ಸಂಬಂಧದ ಬೆಸುಗೆ ಸಾಕಷ್ಟು ಸಡಿಲವಾಗಿದೆ. ಅನೇಕ ಸಂದರ್ಭಗಳಲ್ಲಿ ಮುರಿದುಬೀಳುವ ಮಟ್ಟಕ್ಕೂ ಬಂದು ನಿಂತಿದೆ. ಇವತ್ತು ಎಲ್ಲರಲ್ಲೂ ವಿದ್ಯೆಯಿದೆ, ಹಣವಿದೆ. ಆದರೆ ವಿಶಾಲವಾದ ಹೃದಯ ಮತ್ತು ತೆರೆದ ಮನಸ್ಸು ವಿರಳವಾಗುತ್ತಿದೆ. ನಿಷ್ಕಲ್ಮಷವಾದ ನಗುಮುಖ ಮರೆಯಾಗಿದೆ. ಯಾರನ್ನು ದೂಷಿಸುವುದು? ಏಕೆ ಹೀಗೆ? ನಮಗೇನಾಗಿದೆ? ಎಂದು ಪ್ರಶ್ನಿಸಿಕೊಂಡರೆ ಅವು ಉತ್ತರವಿಲ್ಲದ ಪ್ರಶ್ನೆಗಳಾಗಿಯೇ ಉಳಿದುಬಿಡುತ್ತವೆ. ಎಲ್ಲಕ್ಕಿಂತ ಹೆಚ್ಚಾಗಿ ಇತ್ತೀಚಿನ ಪೀಳಿಗೆಗಳಲ್ಲಿ ಇಂತಹ ಒಂದು ತುಡಿತವೇ ಮಾಯವಾಗಿಬಿಟ್ಟಿದೆ. ಸುಮಧುರ ಸಂಬಂಧಗಳ ಸವಿಯನ್ನೇ ಅರಿಯದ ಇವರು ಅದರ ಮಹತ್ವವನ್ನು ಹೇಗೆ ತಾನೇ ತಿಳಿಯಬಲ್ಲರು? ಪಾಶ್ಚಾತ್ಯ ರೀತಿಯಂತೆ ನಾನು ಬದುಕುವುದೇ ನನ್ನ ಸುಖಕ್ಕಾಗಿ; ಇತರರ (ಅಂದರೆ ತನ್ನ ಸಂಬಂಧಿಕರನ್ನು ಕುರಿತು ಮಾತ್ರ ಇಲ್ಲಿ ಹೇಳಿರುವುದು) ಉಸಾಬರಿ ತನಗೇಕೆ ಎಂಬ ಭಾವನೆ ಎಲ್ಲರಲ್ಲಿ ಮನೆ ಮಾಡುತ್ತಿದೆ. ಸಮಾರಂಭಗಳಲ್ಲಿ ಅಪರೂಪಕ್ಕೆ ಸಿಗುವ ನೆಂಟರಿಗೆ 'ಹಾಯ್' 'ಬಾಯ್' ಹೇಳಿಬಿಟ್ಟು, ಮುಂದಿನ ಕ್ಷಣ ತನ್ನ ಲೋಕಕ್ಕೇ ಜಾರುವವರು ಬಹುಬಂದಿ ಇಂದು. ಆಪ್ತೇಷ್ಟರು ಮರಣ ಹೊಂದಿ ದೇಹವನ್ನು ಭಸ್ಮ ಮಾಡಿದೊಡನೆಯೇ ಸಂಬಂಧಗಳೂ ಭಸ್ಮವಾಗುವ ಕಾಲ ಬಂದಿರುವುದು ನಮ್ಮ ಸಂಸ್ಕೃತಿ ಎತ್ತ ಸಾಗುತ್ತಿದೆ ಎಂಬುದರ ಸೂಚಿ. ಬ್ಯಾಂಕ್ ಬ್ಯಾಲೆನ್ಸ್, 3-4 ನಿವೇಶನಗಳು, ಐಷಾರಾಮಿ ವಸ್ತುಗಳು ಇತ್ಯಾದಿ ಇಷ್ಟೇ ನಮ್ಮ ಜೀವನದ ಪರಮ ಗುರಿ ಎಂದಾದಾಗ ಪರಿಣಾಮ ಮೇಲಿನಂತೆಯೇ ಆಗಲೇಬೇಕಲ್ಲ್ಲವೇ? ಹುಟ್ಟಿದ ಮಗುವನ್ನು ಕ್ರೀಷೆಗೋ, ಆಯಾ ಸುಪರ್ದಿಗೋ ನೀಡಿ ದುಡಿಮೆಗೆ (ದುಡಿಯುವ ಇಂತಹ ಬಹುತೇಕ ಮಂದಿಗೆ ಷೋಕಿ ಬಿಟ್ಟರೆ ಹಣದ ನಿಜವಾದ ಅವಶ್ಯಕತೆ ಇರುವುದು; ಅನಿವಾರ್ಯತೆ ಇರುವುದು ಕೆಲವೇ ಮಂದಿಗೆ ಮಾತ್ರ) ಹೊರಟಾಗ ಮಗುವಿಗೆ ತಾಯಿಯ ಪ್ರೀತಿ, ಮಧುರ ಬಾಂಧವ್ಯದ ಸವಿಯನ್ನು ಉಣಿಸುವವರು ಯಾರು? ಕಾಲಾಂತರದಲ್ಲಿ ಆ ಮಗು ಆ ತಾಯಿ ಮಾಡಿದ್ದನ್ನೇ ಮಾಡುತ್ತದೆ. ಒಂದಿಷ್ಟು ಸೌಲಭ್ಯ, ಹಣಕಾಸು ನೀಡಿ, ತನ್ನ ಪಾಡಿಗೆ ತಾನು ತನ್ನ ಸುಖದ ಅನ್ವೇಷಣೆಯಲ್ಲಿ ತೊಡಗಿಬಿಡುತ್ತದೆ. ಆಗ ತಾಯಿ ಮಗುವನ್ನು ದೂಷಿಸಿ ಪ್ರಯೋಜನವೇನು? ನೇರವಾಗಿ ಹೇಳಬೇಕೆಂದರೆ, ಇಂದು ಸಮಾಜದಲ್ಲಿ ತಾಯಿ ತನ್ನ ಪಾತ್ರವನ್ನು ಸರಿಯಾಗಿ ನಿರ್ವಹಿಸದೇ ಇರುವುದೇ ಈ ಸಂಬಂಧಗಳ ಹಳಸುವಿಕೆಗೆ ಮೂಲ ಕಾರಣವೆಂದರೆ ತಪ್ಪಾಗಲಾರದು. ತಾಯಿ ಸ್ವಾರ್ಥಿಯಾದಾಗ ಅವಳ ಸಂತಾನ ಕೂಡಾ ಅದೇ ಹಾದಿ ಹಿಡಿದೇ ಹಿಡಿಯುತ್ತದೆ. ಕುರುಡು ಕಾಂಚಾಣದ ಹಿಂದೆ ಬಿದ್ದು ನಾಗಾಲೋಟದಲ್ಲಿ ಓಡುತ್ತಿರುವವರಿಗೆ ಮುಂದಿನ ಪರಿಣಾಮಗಳು ಹೇಗೆ ತಾನೇ ಅರಿವಾದೀತು ಅಲ್ಲವೇ? ಪರಿಣಾಮ ಸಂಬಂಧಗಳು ಸೊರಗುತ್ತಿವೆ; ನಿಧಾನವಾದ ಆದರೆ ಅಷ್ಟೇ ಖಚಿತವಾದ ಅನಾಹುತಗಳೆಡೆಗೆ ಸಾಗುತ್ತಿವೆ. [ಇಂತಹ ವಿಚಾರಗಳು ತಲೆ ಹೊಕ್ಕಾಗ ಉಂಟಾಗುವ ತಳವಳ, ವೇದನೆ ಇನ್ಯಾರೊಂದಿಗೂ ಹಂಚಿಕೊಳ್ಳದ ಪರಿಸ್ಥಿತಿಯುಂಟಾದಾಗ ಮನಸ್ಸಿನ ದುಗುಡವನ್ನು ಈ ರೀತಿಯಲ್ಲಾದರೂ ಹೊರಹಾಕಿ ಅಲ್ಪ ನೆಮ್ಮದಿ ಸಿಗುವದೇನೋ ಎಂಬ ಹಂಬಲದೊಂದಿಗೆ ಈ ಬರಹ.]

Friday, July 2, 2010


ಆಂಗ್ಲ ಭಾಷೆಯಲ್ಲಿ ಹೀಗೊಂದು ನುಡಿ ಇದೆ: An idle mind is devil's workshop ಅಂತ. ಆದರೆ ನಿಜವಾಗಿ ಯೋಚಿಸಿ ನೋಡಿ. ನಮ್ಮ ಮನಸ್ಸು ಸೋಮಾರಿ ಅಥವಾ ನಿಷ್ಕ್ರಿಯವಾಗಿರಲು ಸಾಧ್ಯವೇ ಎಂದು. ಒಂದಲ್ಲಾ ಒಂದು ವಿಚಾರವನ್ನು ಸದಾ ಮನಸ್ಸು ಮಂಥನ ಮಾಡುತ್ತಿರುತ್ತಲೇ ಇರುತ್ತದೆ ಎಂಬುದು ಎಲ್ಲರ ಅನುಭವ. ಹಾಗಾಗಿ idle mind ಎನ್ನುವುದಕ್ಕಿಂತ idle body ಎನ್ನುವುದು ಹೆಚ್ಚು ಸೂಕ್ತವೆಂದು ನನ್ನ ಭಾವನೆ. ಮೇಲಿನ ಹೇಳಿಕೆಯಂತೆ ನಿಜವಾಗಿ ನಾವು idle mind ಸ್ಥಿತಿಯನ್ನು ತಲುಪಿದರೆ ಬಹುಶ: ಅದು ನಿರ್ವಿಕಾರದ ಮತ್ತು ನಿಷ್ಕಲ್ಮಷ ಮನಸ್ಸಿನ ಪ್ರತೀಕವೇ ಆಗುತ್ತದೆ. ಹಾಗಾದಾಗ ನಾವು ಮನಸ್ಸಿನ ನೆಮ್ಮದಿಯ ಪರಾಕಾಷ್ಠೆಯನ್ನು ತಲುಪಿದ್ದೇವೆಂದೇ ಭಾವಿಸಬೇಕಾಗುತ್ತದೆ. ಅಂತೆಯೇ idle mind ನ ಸ್ಥಿತಿ ಎಲ್ಲರೂ ತಲುಪಲು ಬಲು ಕಠಿಣ ಸಾಧನೆಯನ್ನೇ ಮಾಡಬೇಕು. idle body ಸ್ಥಿತಿಯಲ್ಲಿ ಮನಸ್ಸು devil's workshop ಆಗಬಹುದು. ಕೈಯಲ್ಲಿ ಮಾಡಲು ಕೆಲಸವಿಲ್ಲದಿದ್ದಾಗ, ಸೋಮಾರಿಯಾಗಿದ್ದಾಗ ಸಹಜವಾಗಿಯೇ ಅನುಪಯುಕ್ತ ಯೋಚನೆಗಳು ನಮ್ಮನ್ನು ಆವರಿಸುತ್ತವೆ. ತಾತ್ಪರ್ಯ ಇಷ್ಟೆ. ಪ್ರತಿ ನಿಮಿಷವೂ (ಜಾಗೃದಾವಸ್ಥೆಯಲ್ಲಿ) ನಾವು ಒಂದಿಲ್ಲೊಂದು ಚಟುವಟಿಕೆಯಲ್ಲಿ ಮಗ್ನರಾಗಿರಬೇಕು. ಆ ಚಟುವಟಿಕೆಗಳು ಸ್ವ-ಹಿತ ಸಾಧನೆಯ ಜೊತೆಜೊತೆಗೆ ಲೋಕಕಲ್ಯಾಣಕ್ಕೂ ಕೈ ಜೋಡಿಸುವಂತಹವಾಗಿರಬೇಕು. ಆ ಚಟುವಟಿಕೆಗಳಿಂದ ನಮಗೂ, ಪರರಿಗೂ ನಿಜವಾದ ಆನಂದ ಮತ್ತು ನೆಮ್ಮದಿ ಲಭ್ಯವಾಗುವಂತಿರಬೇಕು. ಇಂತಹ ಒಂದು ನಿಟ್ಟಿನಲ್ಲಿ ನಮ್ಮ ಚಟುವಟಿಕೆಗಳು ರೂಪುಗೊಂಡಾಗ ನಮ್ಮ ಮನಸ್ಸೂ ಕೂಡ ನಮಗರಿವಿಲ್ಲದೆಯೇ ಅರಳುತ್ತದೆ, ನಗುತ್ತದೆ ಮತ್ತು ನೆಮ್ಮದಿಯ ಗೂಡಾಗುತ್ತದೆ. ಮನಸ್ಸು ಸದಾ ಪ್ರಫುಲ್ಲವಾಗಿದ್ದಷ್ಟೂ ಸತ್ಕಾರ್ಯ, ಸಚ್ಚಿಂತನೆ ಮತ್ತು ಸನ್ನಡತೆಯ ಚಟುವಟಿಕೆಗಳು ತಂತಾನೇ ಹಿಂಬಾಲಿಸುತ್ತವೆ. ಆದುದರಿಂದ ನಮ್ಮ ಮನಸ್ಸು ಮತ್ತು ದೇಹ ಎರಡೂ God's workshop ಆಗುವತ್ತ ನಮ್ಮ ಪ್ರಯತ್ನ ಸಾಗಬೇಕು.